Breaking News :

ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ


ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ


ಮಡಿಕೇರಿ : ಮಾಸಿಕ ಕನಿಷ್ಠ ರೂ.೧೦ ಸಾವಿರ ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆ.೧೨ರಿಂದ ೧೪ರವರೆಗೆ ರಾಜ್ಯದಾದ್ಯಂತ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ತಿಳಿಸಿದ್ದಾರೆ.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವ ಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಜನವರಿ ತಿಂಗಳಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭ ರೂ.೧೫ ಸಾವಿರ ಗೌರವಧನ ನಿಗದಿಪಡಿಸಲು ಆಗ್ರಹಿಸಲಾಗಿತ್ತು. ಅಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ೨೦೨೫ರ ಏಪ್ರಿಲ್ ತಿಂಗಳಿನಿಂದ ಪ್ರತಿ ತಿಂಗಳು ಕನಿಷ್ಠ ರೂ.೧೦ ಸಾವಿರ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ, ಈವರೆಗೂ ಸರ್ಕಾರ ಆದೇಶ ಹೊರಡಿಸಿಲ್ಲ. ಈ ಹಿನ್ನೆಲೆ ಮತ್ತೆ ಪ್ರತಿಭಟನೆಯ ಹಾದಿ ಹಿಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೂರು ದಿನಗಳು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು.

ಏಪ್ರಿಲ್ ತಿಂಗಳಿಂದ ಅನ್ವಯವಾಗುವಂತೆ ಪ್ರತಿ ತಿಂಗಳು ಕನಿಷ್ಠ ರೂ.೧೦ ಸಾವಿರ ಗೌರವಧನ ನೀಡುವ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಆದೇಶ ಹೊರಡಿಸಬೇಕು. ಈ ವರ್ಷದ ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ತಿಂಗಳ ಪ್ರೋತ್ಸಾಹ ಧನ ರೂ.೧ ಸಾವಿರ ಹೆಚ್ಚಿಸಿದಂತೆ, ಆಶಾ ಕಾರ್ಯಕರ್ತೆಯರಿಗೂ ಹೆಚ್ಚಿಸಬೇಕು. ಆಶಾಗಳ ಕಾರ್ಯನಿರ್ವಹಣೆ ಬಗ್ಗೆ ಅವೈಜ್ಞಾನಿಕ ಮೌಲ್ಯಮಾಪನವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಈಗಿರುವ ಜನಸಂಖ್ಯಾ ಮಿತಿಯನ್ನು ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರನ್ನು ಕಾರಣವಿಲ್ಲದೇ ಕೆಲಸದಿಂದ ತೆಗೆಯಬಾರದು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳದ ಮಾದರಿಯಲ್ಲಿ ಇಡಿಗಂಟು ಇಡಬೇಕು. ನಗರದ ಆಶಾಗಳಿಗೆ ಗೌರವ ಧನವನ್ನು ರೂ.೨ ಸಾವಿರ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಪೂರ್ಣಿಮ ಮಾತನಾಡಿ, ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿ ಜಿಲ್ಲೆಯಲ್ಲೂ ಆಹೋರಾತ್ರಿ ಪ್ರತಿಭಟನೆ ನಡೆಯಲಿದೆ. ಅಂದು ನಗರದ ಭಾಲಭವನದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಹಳೇ ಖಾಸಗಿ ಬಸ್ ನಿಲ್ದಾಣ ಮೂಲಕ ನಗರ ಪೊಲೀಸ್ ಠಾಣೆ, ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತದ ವರೆಗೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಮೆರವಣಿಗೆ ಸಾಗಿ ಭಾಲಭವನದಲ್ಲಿ ಸಮಾವೇಶಗೊಳ್ಳಲಿದೆ. ಮೂರು ದಿನಗಳ ಕಾಲ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲಾ ಕಾರ್ಯದರ್ಶಿ ನಾಗಮಣಿ ಮಾತನಾಡಿ, ಕಳೆದ ೧೫ ವರ್ಷಗಳಿಂದ ತಳ ಹಂತದಲ್ಲಿ ನಿಷ್ಠೆಯಿಂದ ಕೆಲಸ ನಿರ್ವಹಿಸಿದ್ದಾರೆ. ಆದರೆ, ಆಶಾ ಕಾರ್ಯಕರ್ತೆಯರ ಗೋಳು ಯಾರಿಗೂ ಬೇಡವಾಗಿದೆ. ಆಳುವ ಸರ್ಕಾರ ನಮ್ಮ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಆಶಾ ಕಾರ್ಯಕರ್ತೆಯರಾದ ವನಿತಾ, ಶಾಂತಿ, ಶ್ರೀಮತಿ ಸುದ್ದಿಗೋಷ್ಠಿಯಲ್ಲಿದ್ದರು.

Share this article

ಟಾಪ್ ನ್ಯೂಸ್

More News