ಜನವಾಹಿನಿ News ಮಡಿಕೇರಿ : ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಬಾಂಧವ್ಯ ಬೆಳೆಯುತ್ತೆ, ಜತೆಗೆ ಪರಸ್ಪರ ಒಬ್ಬರನ್ನೊಬ್ಬರು ಅರಿತುಕೊಳ್ಳಲು ಸಹಕಾರಿ ಆಗುದರ ಜತೆಗೆ ಪ್ರತಿಭೆಗಳನ್ನು ಗುರುತಿಸಲು ಕೂಡ ಅನುಕೂಲವಾಗುತ್ತೆ ಎಂದು ಅಮ್ಮತ್ತಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ವಕೀಲ ಪ್ರಶಾಂತ್ ಅಭಿಪ್ರಾಯಪಟ್ಟರು.
ಟೀಂ ರೆಟ್ರೋ ವತಿಯಿಂದ ಇಂಜಿಲಗೆರೆ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ, ಇಯರ್ ಎಂಡ್ ಕ್ರಿಕೆಟ್ ಕಪ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಿಬ್ಬನ್ ಕಟ್ ಮಾಡಿದ ಬಳಿಕ ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದ ವಕೀಲ ಪ್ರಶಾಂತ್ ಮತ್ತಷ್ಟು ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಸ್ಥಳೀಯರು ಬೆಸೆಯಲು ಅವಕಾಶ ಕಲ್ಪಿಸುವಂತೆ ಸಲಹೆ ನೀಡಿದರು.
ಸ್ಥಳೀಯ ಯುವ ಜನತೆಯನ್ನು ಒಗ್ಗೂಡಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ. ಎರಡು ದಿನಗಳ ಕಾಲ ನಡೆಯುವ ಪಂದ್ಯಾವಳಿಯಲ್ಲಿ ಸುಮಾರು 7 ತಂಡಗಳು ಪಾಲ್ಗೊಂಡಿದ್ದು, ಭಾನುವಾರ ಫೈನಲ್ಸ್ ನಡೆಯಲಿದೆ.
ವಿಜೇತ ತಂಡಗಳಿಗೆ ಆಕರ್ಷಕ ಟ್ರೋಪಿ ಹಾಗೂ ನಗದು ಬಹುಮಾನ ನೀಡಲಿದ್ದು, ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಬ್ಯಾಟ್ಸ್ ಮ್ಯಾನ್ , ಬೆಸ್ಟ್ ಬೌಲರ್, ಬೆಸ್ಟ್ ಫೀಲ್ಡರ್, ಸೇರಿದಂತೆ ವಿವಿಧ ವೈಯಕ್ತಿಕ ಬಹುಮಾನಗಳನ್ನು ಕೂಡ ನೀಡಲಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಅಮ್ಮತ್ತಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಶಾಂತ, ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ರೀಶಾ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ನಿತೀಶ್, ಕಾಂಗ್ರೆಸ್ ಮುಖಂಡ ನೌಶಾದ್, ರೆಟ್ರೋ ಸಂಸ್ಥೆಯ ಅಧ್ಯಕ್ಷ ಅನೀಶ್ ಮತ್ತಿರರು ಇದ್ದರು.









