Breaking News :

ವಿಶ್ವ ಏಡ್ಸ್ ದಿನ : ಎಚ್‍ಐವಿ ಹರಡುವಿಕೆ ನಿಯಂತ್ರಣಕ್ಕೆ ಮುಂದಾಗಿ : ಪ್ರೊ.ಮೇ. ರಾಘವ 


ಜನವಾಹಿನಿ News ಮಡಿಕೇರಿ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಲಯನ್ಸ್ ಸಂಸ್ಥೆ, ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿ, ಎಫ್‍ಎಂಕೆಎಂಸಿ ಕಾಲೇಜು, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಮಡಿಕೇರಿ, ಓಡಿಪಿ-ಸ್ನೇಹಾಶ್ರಯ ಸಮಿತಿ, ಚೈತನ್ಯ ನೆಟ್‍ವರ್ಕ್ ಕೊಡಗು ಹಾಗೂ ಆಶೋದಯ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಏಡ್ಸ್ ದಿನ’ ಕಾರ್ಯಕ್ರಮವು ಸೋಮವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ನಗರದ ಎಫ್‍ಎಂಕೆಎಂಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮೇ. ರಾಘವ ಅವರು ಮಾತನಾಡಿ ಎಚ್‍ಐವಿ ಏಡ್ಸ್‍ನಿಂದ ದೂರವಿರಲು ಸ್ವಯಂ ನಿಯಂತ್ರಣ ಹಾಗೂ ತಾಳ್ಮೆ ಅತೀ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಸ್ವಯಂ ಶಿಸ್ತು ಇದ್ದಲ್ಲಿ ಯಾವುದೇ ರೋಗಗಳು ಬರುವುದಿಲ್ಲ. ಹಲವು ತಪ್ಪುಗಳಿಂದ ಹಲವು ರೋಗಗಳಿಗೆ ಆಹ್ವಾನ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

ಯುವ ಜನರು ಹಾದಿ ತಪ್ಪಿದರೆ ಇಡೀ ಸಮಾಜ ಹದಗೆಡುತ್ತದೆ. ಆದ್ದರಿಂದ ಮನಃ ಪರಿವರ್ತನೆ ಮಾಡಿಕೊಂಡು ಸುಸ್ಥಿರ ಜೀವನ ನಡೆಸುವಂತಾಗಬೇಕು ಎಂದು ಹೇಳಿದರು. ಯಾವುದೇ ಕಾರಣಕ್ಕೂ ಸ್ವೇಚ್ಚಾಚಾರ ನಡೆಯದೆ ಮತ್ತೊಬ್ಬರಿಗೆ ಮಾದರಿಯಾಗಿ ನಡೆದುಕೊಂಡಾಗ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದರು.

ಎಚ್‍ಐವಿ ಏಡ್ಸ್ ನಂತಹ ಮಾರಕ ರೋಗಗಳು ಬರಲು ಸಮಾಜದಲ್ಲಿ ಹಲವು ಕಾರಣಗಳು ಇರುತ್ತವೆ. ಆ ನಿಟ್ಟಿನಲ್ಲಿ ಯಾವುದೇ ರೀತಿಯ ಚಟಕ್ಕೆ ತುತ್ತಾಗದೆ ಸಮಾಜದಲ್ಲಿ ಪರಿವರ್ತನೆ ತರಲು ಮುಂದಾಗಬೇಕು ಎಂದು ರಾಘವ ಅವರು ಹೇಳಿದರು.

ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಬಿ.ಕೆ.ರವೀಂದ್ರ ರೈ ಅವರು ಮಾತನಾಡಿ ಎಚ್‍ಐವಿ ಏಡ್ಸ್ ಸೋಂಕಿತರು ಸಮಾಜದಲ್ಲಿ ಆಗುತ್ತಿರುವ ಆಗುಹೋಗುಗಳ ಬಗ್ಗೆ ನಾವೆಲ್ಲ ತಿಳಿಯುವ ಒಂದು ಅವಕಾಶ ವಿಶ್ವ ಏಡ್ಸ್ ದಿನ. ಕಳೆದ ಹತ್ತಾರು ವರ್ಷಗಳಿಂದ ಪ್ರತೀ ವರ್ಷ ಡಿಸೆಂಬರ್, 01 ರಂದು ವಿಶ್ವದಾದ್ಯಂತ ವಿಶ್ವ ಏಡ್ಸ್ ದಿನ ಆಯೋಜಿಸುತ್ತಾ ಬರಲಾಗುತ್ತಿದೆ. ಸೋಂಕಿತರಿಗೆ ಸಂಬಂಧಿಸಿದ ಮಾಹಿತಿ ತಿಳಿದವರು ಇತರರಿಗೆ ತಿಳಿಸುವ ಸದಾವಕಾಶದ ದಿನ ಇದು ಎಂದರು.

ಲಯನ್ಸ್ ಟ್ರಸ್ಟ್ ಅಧ್ಯಕ್ಷರಾದ ಅಂಬೆಕಲ್ಲು ನವೀನ್ ಅವರು ಮಾತನಾಡಿ ಆರೋಗ್ಯ ಮಾನವನ ಹಕ್ಕು ಪ್ರತಿಯೊಬ್ಬರಿಗೂ ಆರೋಗ್ಯ ಸೇವೆಗಳನ್ನು ಪಡೆಯುವ ಹಕ್ಕಿದೆ. ಅದರಂತೆ ಎಚ್‍ಐವಿ ಸೋಂಕಿತರಿಗೆ ಯಾವುದೇ ಕಳಂಕ ತಾರತಮ್ಯ, ಲಿಂಗ ಭೇದ, ಎಚ್‍ಐವಿ ಸ್ಥಿತಿ ಇತ್ಯಾದಿಗಳನ್ನು ಪರಿಗಣಿಸದೆ ಎಲ್ಲಾ ಆರೋಗ್ಯ ಸೇವೆಗಳು-ಎಚ್‍ಐವಿ ತಡೆ ಚಿಕಿತ್ಸೆ ಮತ್ತು ಆರೈಕೆ ಸೇವೆಗಳನ್ನು ಒದಗಿಸುವುದು. ಅವರಿಗೂ ಕೂಡ ಎಲ್ಲಾ ಆರೋಗ್ಯದ ಸೇವೆಗಳನ್ನು ಪಡೆಯುವ ಹಕ್ಕಿದೆ ಎಂದರು.

ರೋಟರಿ ಮಿಸ್ಟಿ ಹಿಲ್ಸ್ ಸಂಸ್ಥೆಯ ಅಧ್ಯಕ್ಷರಾದ ರತ್ನಾಕರ ರೈ ಅವರು ಮಾತನಾಡಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ಟ್ ಸಾಲ್ಡನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸುನಿತಾ, ಇತರರು ಇದ್ದರು.

‘ಕೊಡಗು ಜಿಲ್ಲೆಯಲ್ಲಿ 2025-26 ನೇ ಸಾಲಿನಲ್ಲಿ 61 ಎಚ್‍ಐವಿ ಏಡ್ಸ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಎಚ್‍ಐವಿ ಏಡ್ಸ್ ಸಂಬಂಧಿಸಿದಂತೆ ಉಚಿತ ಸಹಾಯವಾಣಿ 1097 ಸಂಖ್ಯೆಗೆ ಕರೆ ಮಾಹಿತಿ ಪಡೆಯಬಹುದಾಗಿದೆ ಎಂದು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ಹೇಳಿದರು.’

ಅತ್ಯುತ್ತಮ ರೆಡ್‍ರಿಬ್ಬನ್ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಎನ್‍ಎಸ್‍ಎಸ್ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ನಗರದ ಎಫ್‍ಎಂಸಿ ಕಾಲೇಜು, ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾವೇರಿ ಕಾಲೇಜು, ಗೋಣಿಕೊಪ್ಪ ಕಾವೇರಿ ಕಾಲೇಜು, ಸೋಮವಾರಪೇಟೆ ಸಂತ ಜೋಸೆಫರ ಪದವಿ ಕಾಲೇಜು ಈ ಕಾಲೇಜಿನ ಪ್ರತಿನಿಧಿಗಳನ್ನು ಗೌರವಿಸಲಾಯಿತು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳಿ ಪ್ರಾರಂಭವಾದ ವಿಶ್ವ ಏಡ್ಸ್ ದಿನದ ಜಾಥಗೆ ಚಾಲನೆ ನೀಡಿ ಮಾತನಾಡಿದ ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿ.ಸುರೇಂದ್ರ ಅವರು ಎಚ್‍ಐವಿ ಏಡ್ಸ್ ಹರಡುವ ಹಾಗೂ ನಿಯಂತ್ರಣ ಕುರಿತು ಎಲ್ಲರೂ ತಿಳಿದುಕೊಳ್ಳಬೇಕು. ಎಚ್‍ಐವಿ ಏಡ್ಸ್ ನಿಯಂತ್ರಣ ಎಲ್ಲರ ಜವಾಬ್ದಾರಿ ಎಂದು ಅರಿತುಕೊಳ್ಳೋಣ ಎಂದು ನುಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಮಾತನಾಡಿ ಕಾನೂನು ಸೇವಾ ಪ್ರಾಧಿಕಾರದಿಂದ ಹಲವು ರೀತಿಯ ಕಾನೂನು ಸೇವೆಗಳಿದ್ದು, ನೆರವು ಸಿಗಲಿದೆ ಎಂದು ಹೇಳಿದರು.

ಜಾಥವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳಿ ಆರಂಭವಾಗಿ ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಮಂಗೇರಿರ ಮುತ್ತಣ್ಣ ವೃತ್ತ ಮೂಲಕ ಸಾಗಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವರೆಗೆ ಜಾಥ ನಡೆಯಿತು.

ಜಾಥದಲ್ಲಿ ಹಲವು ಪದವಿ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡು ಎಚ್‍ಐವಿ ಏಡ್ಸ್ ನಿಯಂತ್ರಣ ಬಗ್ಗೆ ಜಾಗೃತಿ ಮೂಡಿಸಿದರು.

Share this article

ಟಾಪ್ ನ್ಯೂಸ್

More News