ಜನವಾಹಿನಿ News ಮಡಿಕೇರಿ : ಕನ್ನಡ ನಾಡು ನುಡಿ ಸಂಸ್ಕೃತಿ ಪರಂಪರೆಯೊಂದಿಗೆ ಪ್ರತಿಯೊಬ್ಬರು ಕನ್ನಡಾಭಿಮಾನವನ್ನು ಮೈಗೂಡಿಸಿಕೊಂಡು ಮುನ್ನಡೆಯುವ ಮೂಲಕ ಕನ್ನಡ ಪರ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕೆಂದು ಗಣ್ಯರು ಕರೆ ನೀಡಿದರು.
ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಅಶ್ರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಸರ್ಕಾರಿ ಶಾಲಾ ಆವರಣದಲ್ಲಿ ವಿವಿಧ ಅರೋಗ್ಯ ಶಿಬಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನೆರವೇರಿತು.
ಆಚರಣೆ ಅಂಗವಾಗಿ ಆರೋಗ್ಯ,ಕಣ್ಣು , ದಂತ ತಪಾಸಣಾ ಶಿಬಿರ ಸೇರಿದಂತೆ ಮಕ್ಕಳ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಅರೋಗ್ಯ ತಪಾಸಣಾ ಶಿಬಿರದಲ್ಲಿ ಸುತ್ತಮುತ್ತಲಿನ ಗ್ರಾಮ ನಿವಾಸಿಗಳು ಆಗಮಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇತಿಹಾಸವಿರುವ ಕನ್ನಡ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ಇದ್ದು, ನಾಡು ನುಡಿ ಸಂರಕ್ಷಣೆಯೊಂದಿಗೆ ಕನ್ನಡ ಅಭಿಮಾನವನ್ನು ಮೈಗೂಡಿಸಿಕೊಂಡು ಮುನ್ನಡೆದಲ್ಲಿ ಕನ್ನಡ ಪ್ರೇಮವನ್ನು ಮತ್ತಷ್ಟು ಬೆಳೆಸಲು ಸಾಧ್ಯವಾಗಲಿದೆ. ಸರ್ವ ಸಹಾಯಿ ಮಿತ್ರ ಮಂಡಳಿ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿ ಆಚರಣೆ ಮಾಡುವುದರ ಮೂಲಕ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪೊನ್ನಂಪೇಟೆ ಶಾರದಾಶ್ರಮದ ಪರಹಿತ ನಂದಾಜಿ ಮಹಾರಾಜ್ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಮುನ್ನಡೆದಲ್ಲಿ ಯಶಸ್ಸು ಕಾಣಲು ಸಾಧ್ಯವಾಗಲಿದ್ದು
ವಿದ್ಯಾರ್ಥಿಗಳು ಕನ್ನಡ ಅಭಿಮಾನದೊಂದಿಗೆ ಶಿಕ್ಷಣದ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಹೇಳಿದ ಅವರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕೆಂದರು.
ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮಾತನಾಡಿ ಎಲ್ಲಾ ಹಬ್ಬ ಆಚರಣೆಗಳಿಗೆ ಎಲ್ಲರೂ ಒಗ್ಗೂಡಿ ಸಹಕಾರ ಪ್ರೋತ್ಸಾಹ ನೀಡುವದರ ಮೂಲಕ ಶಾಂತಿ ಸಹ ಬಾಳ್ವೆಯ ಸಂಕೇತದೊಂದಿಗೆ ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದು ಕರೆ ನೀಡಿದ ಅವರು ಯುವ ಸಮೂಹ ದುಶ್ಚಟಗಳಿಂದ ದೂರವಾಗಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದರು.
ರೆವರೆಂಟ್ ಫಾದರ್ ಮದಲೆೈ ಮುತ್ತು ಅವರು ಮಾತನಾಡಿ ಸರ್ವರನ್ನು ಗೌರವಿಸುವ ಮೂಲಕ ಸೌಹಾರ್ದತೆದೊಂದಿಗೆ ಶಾಂತಿ ಸಹಬಾಳ್ವೆಯ ಜೀವನ ನಡೆಸಲು ಸಾಧ್ಯವಾಗಲಿದೆ
ಗ್ರಾಮ ವ್ಯಾಪ್ತಿಗಳಲ್ಲಿ ಇಂತಹ ಕಾರ್ಯಕ್ರಮಗಳು ನಡೆದರೆ ಎಲ್ಲರೂ ಒಗ್ಗೂಡುವಿಕೆಯೊಂದಿಗೆ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಅರೆಕಳ ಹಾಜಬ್ಬ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಶಾಲೆಗೆ ತಪ್ಪದೆ ಹಾಜರಾಗುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡಲ್ಲಿ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಂಸ್ಕೃತಿಕ ಕಾರ್ಯಕ್ರಮ ಹಾಗೂ ಮ್ಯಾಜಿಕ್ ಶೋ ನೆರೆದಿದ್ದವರ ಗಮನ ಸೆಳೆಯಿತು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಅರೇಕಳ ಹಾಜಬ್ಬ, ಜೀವ ರಕ್ಷಕ ಈಶ್ವರ್ ಮಲ್ಪೆ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿಕ್ಷಕಿ ಬಿ ಬಿ ಜಾಜಿ, ಸೇವೆ ಸಾಧನೆಗಾಗಿ ಸಂಜು ಸುಬ್ಬಯ್ಯ,ಅಬ್ದುಲ್ ರೆಹಮಾನ್ ,ಜನಿಫರ್ ಸೇರಿದಂತೆ ಮತ್ತಿತರರನ್ ಸನ್ಮಾನಿಸಿ ಗೌರವಿಸಲಾಯಿತು.
ಸರ್ವ ಸಹಾಯಿ ಮಿತ್ರ ಮಂಡಳಿ ಅಧ್ಯಕ್ಷ ಎಂ ಎನ್ ವಿಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ, ಮಾಲ್ದಾರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಾಲತಿ,ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಗಣೇಶ್ ಪ್ರಮುಖರಾದ ಸಂಜು ಸುಬ್ಬಯ್ಯ, ಅನೀಫ್ ಸಖಾಪಿ, ರವೀಂದ್ರ ಬಾವೆ, ನಿವೃತ್ತ ಯೋಧ ಮಣಿ, ರಾಫಿ, ನವಾಜ್, ವೈದ್ಯಾಧಿಕಾರಿ ಶಿವಪ್ಪ,ಗ್ರಾಮ ಪಂಚಾಯಿತಿ ಸದಸ್ಯರಾದ ಶೀಲಾ ಕಾವೇರಿ,
ಸರ್ವ ಸಹಾಯಿ ಮಿತ್ರ ಮಂಡಳಿ ಸ್ಥಾಪಕ ಅಧ್ಯಕ್ಷ ಅಬ್ದುಲ್ ರೆಹಮಾನ್ ಸೇರಿದಂತೆ ಸ್ಥಳೀಯ ಆಟೋ ಚಾಲಕರು ಹಾಗೂ ಮಾಲೀಕರು, ಸಮಿತಿಯ ಪ್ರಮುಖರು ಹಾಗೂ ಗಣ್ಯರು ಹಾಜರಿದ್ದರು







